ಗೌರಿ ಹಬ್ಬಕ್ಕೆ ಮಗಳು ಅಳಿಯ ಬರುತ್ತಾರೆಂಬ ಸಂಭ್ರಮದಲ್ಲೇ, ಇರುವ ಪುಟ್ಟ ಮನೆಯನ್ನೇ
ಅಚ್ಚುಕಟ್ಟಾಗಿ ಇಟ್ಟುಕೊಳ್ಳುವ ಅಮ್ಮ. ಮುಂಚೆಯೇ ಬೇಸಾಯ ಸರಿಯಾಗಿ ಲಾಭ ಕೊಡದ, ಮನೆಯಲ್ಲಿ
ದುಡ್ಡಿಲ್ಲದ ಪರಿಸ್ಥಿತಿ. ಆದರೂ ಮಗಳು ಬಂದಾಗ ಕಡೆಯಲ್ಲಿ ಗಡಿಬಿಡಿಯಾಗಬಾರದು ಅಂತ ಅವರಿಗೆ
ಊಟ ತಿಂಡಿಗೆ ಏನೇನು ಸಾಮಾನು ಬೇಕು ಅಂತ ಮುಂಚೆಯೇ ಯೋಚಿಸಿ ಶೆಟ್ಟರಂಗಡಿಯಲ್ಲಿ ಸಾಲ ಹೇಳಿ
ದಿನಸಿ ತರುವ ಅಪ್ಪ. ಮನೆಯವರಿಗೆಲ್ಲ ಮಗಳು ಅಳಿಯ ಬರುವ ಸಂಭ್ರಮ. ಬಸ್ಸಿನಿಂದ ಇಳಿದು
ಬರುವವರಿಗಾಗಿ ಸಮಯ ನೋಡಿಕೊಂಡು ಬಸ್ ನಿಲ್ದಾಣದಲ್ಲೇ ಕಾಯುವ ಅಪ್ಪ. ಬಸ್ಸಿನಿಂದ ನಗುನಗುತ್ತ
ಇಳಿಯುವ ಮಗಳನ್ನು ಸಂತೋಷದಿಂದ ಬರಮಾಡಿಕೊಳ್ಳುವ ಅಪ್ಪನ ಕಣ್ಣಲ್ಲಿ ಆನಂದಭಾಷ್ಪ. ಅಳಿಯನ
ಯೋಗಕ್ಷೇಮವನ್ನು ವಿಚಾರಿಸಿಕೊಳ್ಳುತ್ತಲೇ ಮೊಮ್ಮಗನನ್ನೆತ್ತಿ ಹೆಗಲ ಮೇಲೆ ಕುಳ್ಳರಿಸಿಕೊಂಡು
ಮನೆಯತ್ತ ದಾಪುಗಾಲು ಹಾಕುವ ಅಪ್ಪ. ಎಲ್ಲರನ್ನು ತಲೆಬಾಗಿಲಿನಿಂದಲೇ ಎದುರು ನೋಡುತ್ತ ಅವರು
ಕಂಡೊಡನೆ ಖುಶಿಯಿಂದ ಬರಮಾಡಿಕೊಂಡು ಕಾಲಿಗೆ ನೀರು ಕೊಡುವ ಅಮ್ಮ. ಅದೆಷ್ಟೋ ದಿನಗಳಾದ ಮೇಲೂ
ತನಗೆ ಅನ್ನ ಹಾಕುತ್ತಿದ್ದವಳನ್ನು ನೆನೆಸಿಕೊಂಡು ಬಾಲ ಅಳ್ಳಾಡಿಸುತ್ತ ಅವಳ ಕಾಲ ನೆಕ್ಕುವ
ಮುದ್ದಿನ ನಾಯಿಮರಿ ರಾಜ. ಮಿಯಾಂವ್ ಅಂತ ಒಳಗಿಂದಲೇ ಕಣ್ಣುಮಿಟುಕಿಸುವ ಬೆಕ್ಕಿನಮರಿ. ಸದ್ದು
ಕೇಳಿದೊಡನೆ ಅಲ್ಲಿ ಒಟ್ಟುಸೇರಿ ಸುಖದುಃಖ ಹಂಚಿಕೊಳ್ಳುವ ನೆರೆಹೊರೆಯವರು. ನಗುನಗುತ್ತಲೇ
ಎಲ್ಲರನ್ನು ಮಾತನಾಡಿಸುತ್ತ ತಂದ ಹಣ್ಣು ಸಿಹಿತಿನಿಸುಗಳ ಎಲ್ಲರಿಗೂ ಹಂಚುವ ಆ ಸಂತಸದ
ಕ್ಷಣಗಳು. ಹೆಚ್ಚೂ ಆಗದಂತೆ ಕಡಿಮೆಯೂ ಆಗದಂತೆ ಗೌರವದಿಂದ ಅಳಿಯನ ಮಾತನಾಡಿಸುವ ಅಪ್ಪ ಅಮ್ಮ.
ಅವರಿಗೆ ಬೇಸರವಾಗದಂತೆ ಚುಟುಕಾಗಿ ಉತ್ತರಿಸುವ ಅಳಿಯ. ಅಡುಗೆ ಮನೆಯಿಂದ ಬರುವ ಪಾಯಸದ ಘಮ,
ಬಾಳೆಯೆಲೆ ಕೊಯ್ದು ತರಲು ಹಿತ್ತಲಿಗೆ ಕುಡುಗೋಲು ಹಿಡಿದು ಓಡುವ ಅಪ್ಪ. ಒಟ್ಟಿಗೆ ಕೂತು
ಮಾತನಾಡುತ್ತ ಸವಿಯುವ ಭೋಜನ. ನಂತರದ ಎಲೆ ಅಡಿಕೆ ಜಗಿಯುತ್ತ ಮಾತುಕತೆ. ವಿಚಾರಗಳು ಒಂದಾ,
ಎರಡಾ? ದೂರದ ನಗರದ ಟ್ರಾಫಿಕ್ಕು, ಬೆಲೆ ಏರಿಕೆ, ಸರಕಾರ, ಹಗರಣಗಳು, ಹಳ್ಳಿ, ಬಾರದ ಮಳೆ,
ಹೆಚ್ಚಾದ ಕೀಟಗಳು, ಮಕಾಡೆ ಮಲಗಿದ ಬೆಳೆ, ಕಾಟ ಕೊಡುವ ಮುಳ್ಳುಹಂದಿ, ಪಕ್ಕದ ಕಾಡಿನಲ್ಲಿ
ಊರಿನವನನ್ನು ಹಿಡಿದು ಹಾಕಿದ ಕಿರುಬ, ಕರು ಹಾಕಿದ ಎಮ್ಮೆ, ಬತ್ತಿ ಹೋದ ಕೆರೆ, ಒಣಗಿದ
ಹುಲ್ಲು, ಊರಿನೊಳಕ್ಕೇ ಬಂದ ಆನೆಗಳ ಹಿಂಡು..........ಅದೆಷ್ಟು ವಿಚಾರ. ಅಳಿಯನೊಡನೆ ಮಾವ
ಮಾತಿಗಿಳಿದಿದ್ದರೆ, ಅಡುಗೆ ಮನೆಯೊಳಗೆ ಅವ್ವನ ಸೆರಗು ಹಿಡಿದು ಅವಳಿಗೆ ಮಾತ್ರ ಕೇಳಿಸುವ
ದನಿಯಲ್ಲಿ ಅದೇನೇನೋ ಪಿಸುಗುಟ್ಟುವ ಮಗಳು. ಮಧ್ಯೆ ಮಧ್ಯೆ ಸಮಯಕ್ಕೆ ಸರಿಯಾಗಿ ಕಾಫಿ, ಚಹಾ....
ಅವರು ಬಂದು ಇದ್ದ ಎರಡು ದಿನ ಕೇವಲ ಎರಡು ನಿಮಿಷದಂತೆಯೇ ಕಳೆದುಹೋದ ಭಾವ. ಹಬ್ಬ ಮುಗಿಸಿ
ಹೊರಟ ಮಗಳು ಅಳಿಯನನ್ನು ಇನ್ನೊಂದೆರಡು ದಿನ ಇದ್ದು ಹೋಗುವಂತೆ ಒತ್ತಾಯಿಸುವ ಅಪ್ಪ. ಆದರೂ
ಹೊರಡಲೇಬೇಕೆಂಬ ಹಠ ಹಿಡಿದವರ ಒತ್ತಾಯಕ್ಕೆ ಮಣಿದು ಮಗಳಿಗೆ ಅರಿಶಿನ ಕುಂಕುಮ ಕೊಡಲು ಅವ್ವ
ತಯಾರು. ಯಾರಿಗೂ ಗೊತ್ತಾಗದಂತೆ ಪಕ್ಕದ ಮನೆಯ ಹಿರಿಯರ ಬಳಿ ಓಡಿ ಸಾಲ ಮಾಡಿ ಸಾವಿರ ರೂಪಾಯಿಯ
ನೋಟನ್ನು ಮಡಚಿ ತಂದು ಹೆಂಡತಿಯ ಕೈಗಿಡುವ ಅಪ್ಪ. ಕಣ್ಣಲ್ಲಿ ನೀರು ತುಂಬಿಕೊಳ್ಳುತ್ತಲೇ ಚಾಪೆ
ಮೇಲೆ ಕುಳಿತ ಮಗಳ ಮಡಿಲಿಗೆ ಅಕ್ಕಿ ಹಾಕುತ್ತ ಅರಿಶಿನ ಕುಂಕುಮ ಕೊಟ್ಟು, ಸಾವಿರ ರೂಪಾಯಿಯ
ನೋಟನ್ನು ಕೈಗಿಡುತ್ತಾಳೆ ಅವ್ವ. "ಹೇ, ಇದ್ಯಾಕವ್ವ. ಬ್ಯಾಡ ಮಡಿಕ್ಕೋ" ಅಂತ ಗದ್ಗದಿತಳಾಗಿ
ಹೇಳುವ ಮಗಳಿಗೆ "ಅಯ್ಯೋ, ಮಡಿಕವ್ವ. ಕಡೇ ಘಳಿಗೇಲಿ ನಿಂಗೆ ಒಂದು ಸೀರೆ ತಕಂಡು
ಬರಕ್ಕಾಗನಿಲ್ಲ, ಸಿಬ್ಬರಿ ಬ್ಯಾಡ ನನ್ನವ್ವ, ಒಂದು ಸೀರೇನೋ, ನಿಮ್ ಮನೆಯವುರ್ಗೆ ಒಂದು
ಪಂಚೆನೋ, ಮಗೀಗೆ ಒಂದ್ ಬಟ್ಟೆನೋ ತಕ್ಕೋ. ಬ್ಯಾಡ ಅನ್ಬೇಡ ಕಣ್ ನನ್ ತಾಯಿ" ಅಂತ ಗೋಗರೆಯುವ
ಅವ್ವ. ಅವರ ಒತ್ತಾಯಕ್ಕೆ ಮಣಿದು ಕಣ್ಣಂಚಿನಲ್ಲಿ ತೊಟ್ಟಿಕ್ಕಿದ ನೀರನ್ನು
ಒರೆಸಿಕೊಳ್ಳುತ್ತಲೇ ಆ ನೋಟನ್ನು ಮಡಚಿ ಕೈನಲ್ಲಿಟ್ಟುಕೊಳ್ಳುತ್ತಾಳೆ. ಬೀದಿಯಲ್ಲಿ ಸದ್ದಾಗುವ
ಬಸ್ಸಿನ ಹಾರ್ನ್ ಕೇಳಿದೊಡನೇ ಕೂಗು ಹಾಕುವ ಪಕ್ಕದ ಮನೆಯವರು. "ಉದಯರಂಗಾ ಬಂತು ಕಣವ್ವೋ, ಬಸ್
ಸ್ಟ್ಯಾಂಡ್ ತಮಕೆ ಓಡಿ. ಇಲ್ದಿದ್ರೆ ಮುಂದಿನ ಬಸ್ಸಿನಾಗೆ ಸೀಟ್ ಸಿಕ್ಕದಿಲ್ಲ" ಅನ್ನುವ
ಸದ್ದು ಕೇಳಿದೊಡನೆ. ಮೊಮ್ಮಗನ ಕೆನ್ನೆಗೆ ಮುತ್ತಿಕ್ಕುತ್ತ ಅವನನ್ನು ಸೊಂಟದ ಮೇಲೆ ಹೊತ್ತು
ತರುವ ಅಮ್ಮ. "ಕೊಡೀ ಮಾವ, ನಾನು ಹಿಡ್ಕೋತೀನಿ" ಅನ್ನುವ ಅಳಿಯನ ಮಾತನ್ನು ಕೇಳಿಸಿಕೊಳ್ಳದೆ
ಅವರ ಲಗ್ಗೇಜುಗಳಲ್ಲಿ ಭಾರವಾದದ್ದೊಂದನ್ನು ಹಿಡಿದು ಬಸ್ ಸ್ಟ್ಯಾಂಡಿನತ್ತ ಓಡುವ ಅಪ್ಪ.....
ಬೀದಿಗಳಲ್ಲಿ ಎಲ್ಲರೂ ಕೈಬೀಸುತ್ತ ಬೀಳ್ಕೊಡುತ್ತಿದ್ದರೆ ಎಲ್ಲರಿಗೂ ನಗುನಗುತ್ತಲೇ
ಕೈಬೀಸುತ್ತ ಲಗುಬಗೆಯಲ್ಲಿ ಬಸ್ಸಿನತ್ತ ಓಡುವ ಮಗಳು. ಟಾರು ಹಾಕದ ಮಣ್ಣು ರಸ್ತೆಯ ಮೇಲೆ
ಬುಗ್ಗನೆ ಧೂಳೆಬ್ಬಿಸಿಕೊಂಡು ಬಂದು ನಿಲ್ಲುವ ಉದಯರಂಗ ಬಸ್ಸು. ತುಂಬಿದ್ದ ಬಸ್ಸಿಗೆ
ಹತ್ತುವಾಗಲೂ "ಅಪ್ಪಂಗೆ ಬೇಜಾರ್ ಮಾಡ್ಬೇಡ ಕಣವ್ವೋ, ಉಸಾರು. ಎಲ್ಲರ್ನೂ ಚೆಂದಗೆ ನೋಡ್ಕೋ"
ಅನ್ನುತ್ತ ಕಣ್ತುಂಬಿಕೊಳ್ಳುತ್ತ, ಕೈಲಿ ಮಡಚಿಟ್ಟಿದ್ದ ಅದೇ ಸಾವಿರ ರೂಪಾಯಿಯ ನೋಟನ್ನು
ಯಾರಿಗೂ ಗೊತ್ತಾಗದಂತೆ ಮತ್ತೆ ಅಪ್ಪನ ಅಂಗಿಯ ಜೇಬಿಗೆ ತುರುಕಿ ಕೈಬೀಸುವ ಮಗಳು.
'ರೈ....ರೈಟ್" ಅನ್ನುತ್ತ ಶಿಳ್ಳೆ ಹಾಕಿದೊಡನೆ ತುಂಬುಬಸುರಿಯಂತೆ ನಿಧಾನವಾಗಿ ಮುನ್ನುಗ್ಗುವ
ಕಿಕ್ಕಿರಿದು ತುಂಬಿದ ಉದಯರಂಗ ಬಸ್ಸು. ಬೀದಿಯ ತಿರುವು ಕಾಣುವವರೆಗೂ ಹೋಗುವ ಬಸ್ಸನ್ನೇ
ನೋಡುತ್ತ ಕಣ್ಣೊರೆಸಿಕೊಳ್ಳುತ್ತ ಕೈಬೀಸುವ ಅಪ್ಪ ಅಮ್ಮ. ದು:ಖ ಹೇಳಿಕೊಳ್ಳಲಾಗದೇ ಸುಮ್ಮನೆ
ಅದೇ ದಿಕ್ಕಿನತ್ತ ಮೂಕವಾಗಿ ನೋಡುವ ನಾಯಿಮರಿ ರಾಜ.
ಎಲ್ಲವನ್ನೂ ಕೇವಲ ಹಣದಲ್ಲೇ ಅಳೆಯಲಾಗುವುದಿಲ್ಲ. ಪ್ರೀತಿಯನ್ನೇ ಉಸಿರಾಗಿಸಿಕೊಂಡ ಭಾವುಕರಿಗೆ
ಹಣದ ಹಂಗಿರುವುದಿಲ್ಲ. ಅಲ್ಲಿ ಕೇವಲ ಭಾವನೆಗಳಿಗೆ ಬೆಲೆಯಿರುತ್ತದೆ ಅಷ್ಟೇ.

ಕೃಪೆ

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to